ಮೈಸೂರು,ಮೇ, 7,2025 (www.justkannada.in): ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ಹಾಗೂ ಆಷಾಢ ಶುಕ್ರವಾರಗಳ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿ ಜಿ .ಲಕ್ಷ್ಮೀಕಾಂತ ರೆಡ್ಡಿ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್ ಡಿ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ನಡೆಯುವ ಆಷಾಡ ಮಾಸದ 4 ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವ ಪ್ರಯುಕ್ತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಷಾಢ ಶುಕ್ರವಾರ ಹಾಗೂ ವರ್ಧಂತಿ ದಿನಗಳಂದು ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ. ವಾಹನಗಳನ್ನು ಲಲಿತಾ ಮಹಲ್ ಹೊಟೆಲ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು. ಭಕ್ತಾದಿಗಳಿಗೆ ಸಾರ್ವಜನಿಕ ವಾಹನ ವ್ಯವಸ್ಥೆ ಮಾಡಲಾಗುವುದು.
ಜೂನ್ 27, ಜುಲೈ 04, ಜುಲೈ 11, ಜುಲೈ 18 ರಂದು ನಾಲ್ಕು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಬೇಕು. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಚತೆ ಮಾಡಬೇಕು. ಚೆಸ್ಕಾಂ ವತಿಯಿಂದ 1000 ಮೆಟ್ಟಿಲುಗಳ ಬಳಿಯಿರುವ ವಿದ್ಯುತ್ ದೀಪಗಳ ದುರಸ್ತಿ ಹಾಗೂ ಬೆಟ್ಟದ ದೇವಾಲಯಗಳಿಗೆ ದೀಪಾಲಂಕಾರ ಮಾಡಬೇಕು ಎಂದು ತಿಳಿಸಿದರು.
ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ ಹಾಗೂ ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತವಾಗಿದ್ದು, ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300 ರೂ. ಗಳ ಟಿಕೆಟ್ ನಿಗದಿ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸಿಫ್, ಡಿಸಿಪಿ ಮುತ್ತುರಾಜ್, ಚಾಮುಂಡೇಶ್ವರಿ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Key words:, Ashada Friday, Mysore DC, Laxmikant Reddy, preparations
The post ತಾಯಿ ಚಾಮುಂಡೇಶ್ವರಿ ಜನ್ಮೋತ್ಸವ, ಆಷಾಢ ಶುಕ್ರವಾರ: ಅಗತ್ಯ ಪೂರ್ವ ಸಿದ್ಧತೆಗೆ ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




