ಬೆಂಗಳೂರು, ಮೇ, 22,2025 (www.justkannada.in): ಅರಣ್ಯ ಪ್ರದೇಶದೊಳಗಿನ ರಸ್ತೆಯಲ್ಲಿ ಸಾಗುವ ಪ್ರಯಾಣಿಕರು ತಮ್ಮ ವಾಹನದಿಂದ ಇಳಿದು ವನ್ಯಜೀವಿಯ ಫೋಟೋ ತೆಗೆಯುವುದು, ಸೆಲ್ಫಿ ತೆಗೆಯುವ ಸಾಹಸ ಮಾಡುತ್ತಿದ್ದು, ಇಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕು ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಇಂದು ಬೆಳಗ್ಗೆ ಕೆಲವು ಪ್ರವಾಸಿಗರು ಆನೆಯ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವ ಈಶ್ವರ್ ಖಂಡ್ರೆ, ಅರಣ್ಯ ಮಾರ್ಗದಲ್ಲಿ ಸಂಚರಿಸುವಾಗ ವಾಹನಗಳಿಂದ ಕೆಳಗೆ ಇಳಿಯುವುದು ಅಪರಾಧವಾಗಿದ್ದು, ಆ ವಾಹನದ ನೋಂದಣಿ ಸಂಖ್ಯೆ ಪತ್ತೆ ಮಾಡಿ ಕಾನೂನು ರೀತ್ಯ ಕ್ರಮ ಜರುಗಿಸಲು ಸೂಚಿಸಿದ್ದಾರೆ.
ಪ್ರಾಣದೊಡನೆ ಚೆಲ್ಲಾಟ ಸಲ್ಲದು- ಈಶ್ವರ ಖಂಡ್ರೆ
ರಾಜ್ಯ ಸರ್ಕಾರ, ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಶ್ರಮಿಸುತ್ತಿದೆ. ಸಾರ್ವಜನಿಕರು ಈ ರೀತಿ ಸೆಲ್ಫಿ ತೆಗೆದುಕೊಳ್ಳುವ, ಫೋಟೋ ತೆಗೆಯುವಾಗ ಅನಾಹುತ ಸಂಭವಿಸುವ ಅಪಾಯ ಇರುತ್ತದೆ. ಯಾರೂ ತಮ್ಮ ಅಮೂಲ್ಯ ಜೀವದೊಂದಿಗೆ ಚೆಲ್ಲಾಟ ಆಡಬಾರದು ಎಂದು ಮನವಿ ಮಾಡಿದ್ದಾರೆ.
Key words: No selfie, with, wildlife, Minister, Ishwar Khandre
The post ವನ್ಯಜೀವಿಗಳೊಂದಿಗೆ ಸೆಲ್ಫಿ ಬೇಡ: ಸಚಿವ ಈಶ್ವರ್ ಖಂಡ್ರೆ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




