ಮೈಸೂರು, ಏಪ್ರಿಲ್, 6,2026 (www.justkannada.in): ಜಿಲ್ಲೆಯ ನಜರ್ ಬಾದ್ ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಏಪ್ರಿಲ್ 19 ರಿಂದ 27 ರವರೆಗೆ ಅಗ್ನಿವೀರ್ ರ್ಯಾಲಿ ನಡೆಯಲಿದೆ. ರ್ಯಾಲಿಯಲ್ಲಿ 6235 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಬೆಂಗಳೂರಿನ ಭಾರತೀಯ ಸೇನೆ ನೇಮಕಾತಿ ಅಧಿಕಾರಿ ಕರ್ನಲ್ ವಿವೇಕ್ ಜಮದರ್ ಅವರು ತಿಳಿಸಿದರು.
ಇಂದು ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಗ್ನಿವೀರ್ ರ್ಯಾಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಳೆದ ಸಾಲಿನ ಜೂನ್ ಮಾಹೆಯಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿದ್ದು, ಎರಡನೇ ಹಂತದ (ಸ್ಕ್ರೀನಿಂಗ್ ಪರೀಕ್ಷೆ) ಅಗ್ನಿ ವೀರ್ ರ್ಯಾಲಿ ಪರೀಕ್ಷೆ ಏಪ್ರಿಲ್ 19 ರಿಂದ ನಡೆಯಲಿದೆ ಎಂದರು.
ರ್ಯಾಲಿಯಲ್ಲಿ 6043 ಪುರುಷ ಹಾಗೂ192 ಮಹಿಳಾ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಪ್ರತಿ ದಿನ 800 ಅಭ್ಯರ್ಥಿಗಳ ದೈಹಿಕ ಸೇರಿದಂತೆ ಇತರೆ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಏಪ್ರಿಲ್ 27 ರಂದು ಮಹಿಳಾ ಅಭ್ಯರ್ಥಿಗಳ ರ್ಯಾಲಿ ನಡೆಯಲಿದೆ ಎಂದರು.
ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ನಂಜರಾಜ ಬಹದ್ದೂರ್ ಛತ್ರದಲ್ಲಿ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ರ್ಯಾಲಿಯಲ್ಲಿ ಭಾಗವಹಿಸಿ ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದವರು ಮಾತ್ರ ವೈದ್ಯಕೀಯ ಪರೀಕ್ಷೆಗೆ ಹಾಜರಾಗುತ್ತಾರೆ. ಒಬ್ಬ ಅಭ್ಯರ್ಥಿಯು ಒಂದರಿಂದ ಎರಡು ದಿನಗಳು ಮಾತ್ರ ವಾಸ್ತವ್ಯ ಮಾಡಲಿದ್ದಾರೆ ಎಂದರು.
ರ್ಯಾಲಿ ನಡೆಯುವ ದಿನದಂದು ಆರೋಗ್ಯ ಇಲಾಖೆಯಿಂದ ಅಂಬ್ಯೂಲೆನ್ಸ್, ಅಗತ್ಯ ವೈದ್ಯರು, ಸಿಬ್ಬಂದಿ ಹಾಗೂ ಔಷಧಿಗಳ ವ್ಯವಸ್ಥೆ ಮಾಡಿಕೊಡುವಂತೆ ತಿಳಿಸಿದರು.
ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಕುಡಿಯುವ ನೀರು, ತಾತ್ಕಲಿಕ ಶೌಚಾಲಯ, ಸ್ವಚ್ಛತಾ ವ್ಯವಸ್ಥೆ, ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ, ನಿರ್ಮಿತಿ ಕೇಂದ್ರದ ವತಿಯಿಂದ ಅಗತ್ಯ ಟೆಂಟ್ ಗಳು ಹಾಗೂ ಸಿ.ಸಿ.ಟಿ.ವಿ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಭಾರತೀಯ ಸೇನೆಯಲ್ಲಿ ಅಂದಾಜು 2030 ನೇ ಸಾಲಿನವರೆಗೆ ಹೆಚ್ಚಿನ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ಎಂದರು.
ಜಿಲ್ಲೆಯಲ್ಲಿ ನಡೆಯಲಿರುವ ರ್ಯಾಲಿ ವೀಕ್ಷಿಸಲು ಪ್ರೌಢಶಾಲೆಯ ವಿದ್ಯಾರ್ಥಿಗಳು, ಎನ್ಸಿಸಿ , ಎನ್ ಎಸ್.ಎಸ್ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವುದರಿಂದ ವಿದ್ಯಾರ್ಥಿಗಳಿಗೆ ಆಯ್ಕೆ ಪ್ರಕ್ರಿಯೆಯ ಬಗ್ಗೆ ತಿಳುವಳಿಕೆ ಹಾಗೂ ಸೇನೆ ಸೇರುವ ಬಗ್ಗೆ ಆಸಕ್ತಿ ಮೂಡುತ್ತದೆ. ವಿದ್ಯಾರ್ಥಿಗಳು ಭಾಗವಹಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆಯುವಂತೆ ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಭಾರತೀಯ ಸೇನೆಯ ನೇಮಕಾತಿ ವಿಭಾಗದ ವೈದ್ಯಕೀಯ ಅಧಿಕಾರಿ ಮೇಜರ್ ಕಪಿಲ್ ಕುಮಾರ್ ಶರ್ಮ, ಉಪ ನೇಮಕಾತಿ ಅಧಿಕಾರಿ ಸುಬೇದಾರ್ ಮೇಜರ್ ಶಾಮ್ ಸಿಂಗ್, ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ರೆಡ್ಡಿ, ಆರೋಗ್ಯ ಇಲಾಖೆಯ ಡಾ: ಗೋಪಿನಾಥ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಾಸ್ಕರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Agniveer Rally, Mysore, 6235 candidates, participated, Colonel, Vivek Jamdar
The post ಏ. 19 ರಿಂದ ಅಗ್ನಿವೀರ್ ರ್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




